Sunday, September 8, 2024
Homeಸುದ್ದಿಉಡುಪಿ: 24×7 ಎಂಸಿಎಂಸಿ ಮೂಲಕ ಜಾಹೀರಾತುಗಳ ಮೇಲೆ ನಿಗಾ

ಉಡುಪಿ: 24×7 ಎಂಸಿಎಂಸಿ ಮೂಲಕ ಜಾಹೀರಾತುಗಳ ಮೇಲೆ ನಿಗಾ

ಉಡುಪಿ, ಏ.05: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ, ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ, ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಣಾವಲು ಸಮಿತಿ(ಎಂಸಿಎಂಸಿ) ಇಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಎಂಸಿಎಂಸಿಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಪ್ರತ್ಯೇಕ ಕಚೇರಿಯನ್ನು ತೆರೆದಿದ್ದು, ಇಲ್ಲಿ 24×7 ಜಾಹೀರಾತುಗಳನ್ನು ಪರಿಶೀಲಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಸಾರವಾಗುವ ಎಲ್ಲಾ ಸ್ಥಳೀಯ ಟಿವಿ ಚಾನೆಲ್ ಗಳಲ್ಲಿನ ಕಾರ್ಯಕ್ರಮಗಳನ್ನು ನಿರಂತರವಾಗಿ ವೀಕ್ಷಿಸಲು 3 ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿದ್ದು, 8 ಟಿವಿ ಪರದೆಗಳ ಮೂಲಕ ಸದ್ರಿ ಚಾನೆಲ್ ಗಳಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಕಾರ್ಯಕ್ರಮಗಳನ್ನು ವೀಕ್ಷಿಸಿ ಅದರಲ್ಲಿ ಬರುವ ಎಲ್ಲಾ ರೀತಿಯ ಕಾರ್ಯಕ್ರಮಗಳ ಬಗ್ಗೆ ಪ್ರತ್ಯೇಕ ರಿಜಿಸ್ಟರ್ ಗಳಲ್ಲಿ ದಾಖಲು ಮಾಡುತ್ತಿರುವ ಸಿಬ್ಬಂದಿಗಳು, ಎಂಸಿಎಂಸಿ ಯಿಂದ ಪೂರ್ವಾನುಮತಿ ಪಡೆಯದೇ ಪ್ರಸಾರವಾಗುವ ಜಾಹೀರಾತುಗಳು ಮತ್ತು ನೀತಿ ಸಂಹಿತೆ ಉಲ್ಲಂಘನೆ ವ್ಯಾಪ್ತಿಗೆ ಬರುವ ಕಾರ್ಯಕ್ರಗಳ ಬಗ್ಗೆ ನೋಡೆಲ್ ಅಧಿಕಾರಿಗಳಿಗೆ ವರದಿ ನೀಡುತ್ತಿದ್ದಾರೆ.

ಸ್ಥಳೀಯ ಟಿವಿ ಚಾನೆಲ್ ಗಳಲ್ಲಿ ಪ್ರಸಾರವಾಗುವ ಎಲ್ಲಾ ಕಾರ್ಯಕ್ರಮಗಳನ್ನು ಸಂಪೂರ್ಣ ರೆಕಾರ್ಡ್ ಆಗುವ ರೀತಿಯಲ್ಲಿ ಟಿವಿಗಳಿಗೆ ಡಿವಿಆರ್ ಗಳನ್ನು ಅಳವಡಿಸಲಾಗಿದ್ದು, ನೀತಿ ಸಂಹಿತೆ ಉಲ್ಲಂಘನೆಯ ವರದಿಗಳು ಹಾಗೂ ಜಾಹೀರಾತುಗಳು ಪ್ರಸಾರವಾದಲ್ಲಿ ಅವುಗಳ ನಿರ್ದಿಷ್ಟ ಅವಧಿಯ ಕ್ಲಿಪಿಂಗ್ ಗಳನ್ನು ಡಿವಿಆರ್ ನಿಂದ ತೆಗೆದು ಸಂಬಂದಪಟ್ಟ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಮುಂದಿನ ಕ್ರಮಕ್ಕೆ ಸಲ್ಲಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಟಿವಿ ಚಾನೆಲ್ ಗಳು ಮಾತ್ರವಲ್ಲದೇ ಎಲ್ಲಾ ದಿನಪತ್ರಿಕೆಗಳನ್ನೂ ಪರಿಶೀಲನೆಯನ್ನು ನಡೆಸುತ್ತಿದ್ದು, ಪ್ರತಿದಿನದ ಪತ್ರಿಕಾ ವರದಿಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ.

ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗುವ ಜಾಹೀರಾತುಗಳ ಕುರಿತೂ ಸಹ 24×7 ನಿಗಾವಹಿಸಲು ಸಾಮಾಜಿಕ ಮಾಧ್ಯಮ ನಿರ್ವಹಣಾ ಪರಿಣಿತರ ಪ್ರತ್ಯೇಕ ತಂಡವನ್ನು ರಚಿಸಲಾಗಿದ್ದು ಅವರೂ ಸಹ 3 ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣೆ ನಡೆಸಲು, ಚುನಾವಣಾ ಆಯೋಗದ ಸೂಚನೆಯಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಕಾರ್ಯಕ್ರಮದ ಕುರಿತು ಮುದ್ರಣ, ದೃಶ್ಯ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸುವ ಮುನ್ನ ಜಿಲ್ಲಾ ಎಂಸಿಎಂಸಿ ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News